ಕಾಸರಕೂಸು

ಏಕಾಂತೆಯ ತರಂಗಗಳ ಅರಸಿ..

ಶನಿವಾರ, ಜೂನ್ 19, 2021

ಅಂಶ


ನೀ ನನ್ನೊಳಗೆ ಬೆಳೆಯಬೇಕಿತ್ತು
ಬೊಜ್ಜಾಗಿಯೋ
ತ್ಯಾಜ್ಯವಾಗಿಯೋ ಅಲ್ಲ
ನನ್ನಾತ್ಮದ ಬುದ್ಧನಾಗಿ
ಪ್ರತಿ ಉಸಿರಾಡದಲಿ
ನಿನ್ನಂಶದ ತಾಳ್ಮೆಯಾಗಿ
ಕಸಿವಿಸಿ ಮೊಳಕೆಗಳ 
ಹಸಿರಂಶವಾಗಿ 
ದೃಢತೆ ಕಾಯದ ಹೆಮ್ಮರವಾಗಿ 
ಹಾರಾಡಿ, ಕಾಲ್ಕಿತ್ತು ಓಡುವ 
ನನ್ನೊಳಗಿಗೆ  ಲಗಾಮುದಾರನಾಗಿ. 


ಶುಕ್ರವಾರ, ಜೂನ್ 11, 2021

ಕನಸುಗಳು

ನಾ ಕಂಡ ಕನಸುಗಳಲಿ
ನೇವರಿಸುವ ನೆತ್ತಿಗಳಿರಬೇಕಿತ್ತು
ಕನಸುಗಳಿಗೆ ಬಲೆ ಹೆಣೆದು
ದಾರಿ ತೋರುವ ಕಲ್ಪನೆಯ
ಹೊತ್ತಿಗೆಗಳಿರಬೇಕಿತ್ತು
ಮಾತುಗಳಿಗೆ ಹಿತ ತುಂಬುವ
ತುಟಿಗಳಿರಬೇಕಿತ್ತು
ವಾಸ್ತವಕ್ಕೆ ಚಿಮ್ಮಿ ನಿಲ್ಲುವ 
ಪಾದಗಳ ಸ್ಪರ್ಶವಿರಬೇಕಿತ್ತು 
ಸೂಕ್ಷ್ಮಕ್ಕೆ ಸೂಕ್ಷ್ಮ ತಿಳಿಸುವ 
ಅರಿವುಗಳಿರಬೇಕಿತ್ತು 
ಭಾವಕ್ಕೆ ನಂಟು ಬೆಸೆಯುವ 
ಮಿಡಿತಗಳಿರಬೇಕಿತ್ತು 
ರಾಗಕ್ಕೆ ಲಯ ಬೆಸೆಯುವ
ತಾಳ ಸಿಗುವಂತಿರಬೇಕಿತ್ತು 
ಸುಮ್ಮನೆ ಕೂತಾಗ ಸ್ಪರ್ಶಿಸಿ 
ಛೇಡಿಸಿ ಹೋಗುವ ತಂಗಾಳಿಯ 
ಸಾಂಗತ್ಯವಿರಬೇಕಿತ್ತು 
ಏನಿಲ್ಲದಿದ್ದರೂ 
ನಿನ್ನಲ್ಲಿಯ ಬುದ್ಧನ ಸಾಮರಸ್ಯದ 
ಹಿತ ಸ್ಪರ್ಶ ಸ್ವಲ್ಪವಾದರೂ 
ಇರಬೇಕಿತ್ತು. 

ಹೆಪ್ಪು


ನೀ ಅಂದು ನಕ್ಕೆ.. !
ಗಾಣದಲ್ಲಿ ಸಿಕ್ಕಿದ ನಗು ಹೆಪ್ಪುಗಟ್ಟಿ ತಿರುಗಿತು
ಗಾಣ ನಿಂತರೂ ಸವೆದ ದಾರಿಗಳು ಮಾಸಿಲ್ಲ
ತಿರುಗುತ್ತಲೇ ಇವೆ
ಒಳಗಿಳಿದ ಅದರ ಬೇರುಗಳು
ನಾ ನಕ್ಕು ಚಿಗುರೊಡೆಯಲು
ಇಂದೂ ಕಾಯುತ್ತಲೇ ಇವೆ.






ಗುರುವಾರ, ಜೂನ್ 3, 2021

ಎಲ್ಲರು ಅವನನ್ನು ಹುಚ್ಚನೆಂದೇ ಕರೆಯುತ್ತಿದ್ದರು, ನೋಡಲು ಸರಿಸುಮಾರು ಹಾಗೆಯೇ. ಎಣ್ಣೆ ಕಂಡು ವರ್ಷಗಳೇ ಕಳೆದಿದ್ದ ಕೂದಲು, ಎಂದೂ ತೆಗೆಯದ ಆ ಕಪ್ಪು ಬಿಳಿ ಗಡ್ಡ, ಚರಂಡಿಯ ಕೊಳಚೆಯೂ ನಾಚುವಂತ ಕೊಳಕಲು ಬಟ್ಟೆ, ಸ್ನಾನ, ಏನೆಂಬುದನ್ನೇ ಅರಿಯದ ದೇಹ,ಎಣ್ಣೆಯ ವಾಸನೆಯನ್ನು ಕಂಡಿರದ ಕೂದಲು, ಹೆಗಲ ಮೇಲೆ ಸದಾ ಸಂಗಾತಿಯಾಗಿದ್ದ ಒಂದು ಚೀಲ, ಹೀಗೆ ಆ ವ್ಯಕ್ತಿ ಕಾಣಸಿಗುತ್ತಿದ್ದ ದೈನಂದಿನ ಚಿತ್ರಣ. 

 ಸಿಕ್ಕ ಸಿಕ್ಕಲ್ಲಿ  ವಸ್ತುಗಳನ್ನು ಚೀಲಗಳಲ್ಲಿ ತುಂಬುವುದು, ಕಂಡ ಕಂಡ ಮನೆಯ ಹೊರಗೆ ಸಿಕ್ಕಿದ್ದನ್ನೆಲ್ಲಾ ಕದಿಯುವುದು, ಕೆಟ್ಟ ಕೆಟ್ಟ ಮಾತುಗಳಲ್ಲಿ ಜನರನ್ನು ಬೈಯುತ್ತಾ ನಡೆದಾಡುತ್ತಿದ್ದ ಆ ವ್ಯಕ್ತಿಯನ್ನು  ನೋಡಿ ಜನ, ವ್ಯಕ್ತಿಯನ್ನು ಹುಚ್ಚನೆಂದು ಕರೆಯುತ್ತಿದ್ದರು. ಹಾಗೆಯೇ ಕಳ್ಳತನ ಮಾಡುತ್ತಿದ್ದ ಕಾರಣಕ್ಕಾಗಿ,  ಆಗಾಗ್ಗೆ ಜನಗಳಿಂದ ಹೊಡೆತದ ರುಚಿಯನ್ನು ಕಂಡಿದ್ದರೂ ಕಳ್ಳತನ ಬಿಡುತ್ತಿರಲಿಲ್ಲ. ಬಹುಶಃ ಹಸಿವಿನ ದಾಹ ಮತ್ತು ಕುಡಿತದ ಚಟವನ್ನು ನೀಗಿಸಲು. 

ನಾನು ಆ ವ್ಯಕ್ತಿಯನ್ನು ಗಮನಿಸಿದ ಹಾಗೆ ಸಂಬಂಧಿಗಳಿದ್ದು, ಮದುವೆಯ ಗೋಜಿರಲಿಲ್ಲವಾದ್ದರಿಂದ ಏಕಾಂಗಿಯಾಗಿದ್ದರು. ಸಣ್ಣ ಪಟ್ಟಣವೆಂದು ಗುರುತಿಸಿಕೊಳ್ಳುವ , ತಾರಸಿ, ಬಹುಅಂತಸ್ತಿನ ಮನೆಗಳ ಮಧ್ಯೆ ಇದ್ದ,  ತನ್ನ ಪಾಳುಮನೆಯಲ್ಲಿ ವಾಸ. ಆ ಮನೆಯೊಳಗೋ ಕದ್ದು ತಂದಿದ್ದ ಏನೇನೋ ವಸ್ತುಗಳು, ಬಟ್ಟೆ, ಪಾತ್ರೆ, ದೊಡ್ಡ ಕಲ್ಲುಗಳು, ಮೂಟೆಗಳು ಕಾಫಿ ಬೀಜ, ಮೆಣಸು, ಶುಂಠಿ, ಹೀಗೆ ಏನೇನೋ.  ಈ ಕದ್ದು ತಂದ ವಸ್ತುಗಳನ್ನು ಅಂಗಡಿಯಲ್ಲಿ ಮಾರುವುದು, ಅವರು ಕೊಟ್ಟ ಅಲ್ಪ -ಸ್ವಲ್ಪ ಹಣದಲ್ಲಿ ಕುಡಿದು, ಆ ಪಾಳು ಮನೆಯೊಳಗೆ ಶವಾಸನ ಹಾಕಿ ಮಲಗುವುದು. 

ಸೂರ್ಯ ಹುಟ್ಟುವುದಕ್ಕಿಂತ ಮುಂಚೆ ಎದ್ದು ಅವರಿವರ ಮನೆಯ ಹಿತ್ತಲು ಹುಡುಕುವುದು, ಆ ವ್ಯಕ್ತಿಯ ದಿನಚರಿಯಾಗಿತ್ತು.ಈ ದಿನಚರಿ ಕೊರೋನಾ ಲಾಕ್ಡೌನ್ ದಿನಗಳಲ್ಲೂ ಮುಂದುವರೆದಿತ್ತು. ಆದರೆ ಎಂದೂ ಆ ವ್ಯಕ್ತಿ ಮಾಸ್ಕ್ ಮೊರೆ ಹೋದವರಲ್ಲ. ಹಾಗೆ ಕೊರೋನಾ ಸಹ ಅವರ ಬಳಿ ಬಂದಿದ್ದಿಲ್ಲ. ಆದರೆ ಮೂರು ದಿನಗಳಿಂದ ಸದಾ ಬೀದಿಯಲ್ಲಿ ಸುತ್ತಾಡುತ್ತಿದ್ದ  ಆ ವ್ಯಕ್ತಿ ಕಾಣುತ್ತಿರಲಿಲ್ಲ. ಅಂತಹ ವ್ಯಕ್ತಿಯ ಬಗ್ಗೆ ಯಾರು ತಾನೇ ತಲೆಕೆಡಿಸಿ ಕೊಂಡಾರು? 

ಯಾವಾಗ ಆ ಪಾಳುಮನೆಯಿಂದ ಕೆಟ್ಟ ವಾಸನೆ ಅಕ್ಕ ಪಕ್ಕದ ಮನೆಗೆ ಬಡಿಯಿತೋ,ಅನುಮಾನಾಸ್ಪದದಿಂದ  ಒಳ ಹೊಕ್ಕು ನೋಡಿದಾಗ ಎಲ್ಲರ ಅನುಮಾನ ನಿಜವಾಗಿತ್ತು, ಹುಚ್ಚನೆಂದು ಕರೆಸಿಕೊಳ್ಳುತ್ತಿದ್ದ ವ್ಯಕ್ತಿ  ಸತ್ತು ದಿನಗಳು ಕಳೆದಿದ್ದವು.  

ಸಂಬಂಧಿಕರು, ಬೆಲೆಬಾಳುವ ಆಸ್ತಿ, ಹಲವಾರು ಲಕ್ಷಗಳನ್ನು ಇಟ್ಟಿದ್ದ( ಜನಗಳ ಮಾತು ),  ಇಷ್ಟೆಲ್ಲಾ ಇದ್ದಾರು, ಆ ವ್ಯಕ್ತಿಯ ಅಂತ್ಯ ಸಂಸ್ಕಾರ ನಡೆದದ್ದು, ಗ್ರಾಮ ಪಂಚಾಯಿತಿಯಿಂದ ಒಂದು ಗೂಡ್ಸ್ ಆಟೋ ನಲ್ಲಿ ತೆಗೆದುಕೊಂಡು ಹೋಗಿ ಹೂತರು. 

ಆ ವ್ಯಕ್ತಿಯ ದುರ್ದೈವ ಅಷ್ಟೆಲ್ಲಾ ಬೆಲೆಬಾಳುವ ಆಸ್ತಿ ಇದ್ದರೂ ವಿದ್ಯೆ, ಸಾಮಾನ್ಯ ತಿಳುವಳಿಕೆ ಇಲ್ಲದೆ, ಒಂದು ದಿನವೂ ಸಾಮಾನ್ಯ ಜನಗಳಂತೆ ಬಾಳದೆ ಅನಾಥ ಶವವಾಗಿ ಜೀವಬಿಟ್ಟಿದ್ದು. 

 ಹುಚ್ಚನಿಗೆ ಕೊರೋನಾ, ಕುಡಿದ ಮತ್ತಿನಲ್ಲಿ ಬಿದ್ದು ತಲೆಗೆ ಪೆಟ್ಟು ಬಿದ್ದಿದೆ,  ಹೀಗೆಲ್ಲ  ಸತ್ತ ಕೆಲವು ದಿನಗಳ ನಂತರ ಜನಗಳು ಹುಚ್ಚು ಹುಚ್ಚಾಗಿ ಮಾತಾಡುತ್ತಿದ್ದರು. ಆದರೆ ಆ ವ್ಯಕ್ತಿ ಜನಗಳು ಹೇಳುವಂತೆ ಹುಚ್ಚನಾಗಿರಲಿಲ್ಲ. ಅವನ ವೇಷ ಭೂಷಣಗಳಷ್ಟೇ ಹುಚ್ಚಾಗಿದ್ದವು.  



ಬುಧವಾರ, ಜೂನ್ 2, 2021

ಉಯಿಲು

ಕೊಟ್ಟು ಬಿಡಿ ನಿಮ್ಮಲಿ
ಚಾಚುತ್ತಿರುವ ಕೆನ್ನಾಲಿಗೆಯ ಕಿಚ್ಚುಗಳಿಗೆ
ನನ್ನ ವಿಳಾಸವನು
ದೇವರು ನನ್ನ ಹೆಸರಿಗೆ ಉಯಿಲು
ಬರೆದು ಅದರ ಮೇಲೆ ನನ್ನ
ಹೆಸರು ಅಂಟು ಹಾಕಿದ್ದಾನೆ ಎನ್ನಲಾಗಿದೆ
ನುಂಗಲು |ನೀರು ಕುಡಿಯಲು 
ದಣಿವಾರಿಸಿ ಕೊಳ್ಳಲು |ತಿಂದು ತೇಗಲು 
ಹಾ.....,     ಮರೆಯದಿರಿ  
ನಿಮ್ಮ ಅಕ್ಕ ಪಕ್ಕದವರು, ಪರಿಚಿತರಿಗೆ 
ನನ್ನ ವಿಳಾಸ ಕೊಡಲು. 





ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು  ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...